ER NEWS
ಇನ್ನೇನು 2018ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತಯೇ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದೆ. ಹುಣಸೂರು ಮತ್ತು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸ್ಪರ್ಧಿಸುವ ಜೆಡಿಎಸ್ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಹುಣಸೂರು ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ನಿರಾಸೆಯಾಗಿದೆ.
ಮಂಗಳವಾರ ಸುದ್ದಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ.ದೇವೇಗೌಡ ಕಣಕ್ಕಿಳಿಯಲಿದ್ದು, ಹುಣಸೂರು ಕ್ಷೇತ್ರದಿಂದ ಎಚ್.ವಿಶ್ವನಾಥ್ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು. ಹುಣಸೂರು ಕ್ಷೇತ್ರದಿಂದ ಬೇರೆಯವರಿಗೆ ಟಿಕೆಟ್ ನೀಡಲಾಗುತ್ತಿದೆ ಎನ್ನುವ ವದಂತಿಗಳಲ್ಲಿ ಸತ್ಯಾಂಶವಿಲ್ಲ. ಹಿರಿಯ ಮುಖಂಡರಾದ ವಿಶ್ವನಾಥ್ ಸ್ಪರ್ಧೆಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟನೆ ನೀಡಿದರು.
ಕುಟುಂಬದಿಂದ ಇಬ್ಬರೇ ಸ್ಪರ್ಧೆ ಎಂದ ಎಚ್ ಡಿಕೆ
ಪ್ರಜ್ವಲ್ ರೇವಣ್ಣ ಹುಣಸೂರು ಕ್ಷೇತ್ರಕ್ಕೆ ಸ್ಪರ್ಧಿಸುವ ಸಲುವಾಗಿಯೇ ಕಳೆದ ಕೆಲ ಸಮಯದಿಂದ ಕ್ಷೇತ್ರದಲ್ಲಿ ಓಡಾಡಿಕೊಂಡು ಸಭೆ, ಸಮಾರಂಭಗಳಲ್ಲಿ ಪಾಲ್ಗೊಂಡು ಜನರ ಮಧ್ಯೆ ಗುರುತಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದರು. ಆದರೆ ಇದಕ್ಕೆ ಅಡ್ಡಗಾಲು ಹಾಕಿದ ಚಿಕ್ಕಪ್ಪ ಎಚ್.ಡಿ.ಕುಮಾರ ಸ್ವಾಮಿ ಅವರು ತಮ್ಮ ಕುಟುಂಬದಿಂದ ರೇವಣ್ಣ ಹಾಗೂ ನಾನು ಹೊರತುಪಡಿಸಿ ಬೇರೆ ಯಾರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.