Public News
ನವದೆಹಲಿ: ರಾಮಮಂದಿರ ಭಕ್ತರು ನೀಡಿರುವ ದೇಣಿಗೆಯನ್ನು ದುರುಪಯೋಗ ಮಾಡಿಕೊಳ್ಳುವುದು ಭಕ್ತರ ನಂಬಿಕೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಜಮೀನು ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಟ್ವೀಟ್ ಮಾಡಿರುವ ಪ್ರಿಯಾಂಕ ಗಾಂಧಿ, "ಕೋಟ್ಯಂತರ ಜನರು ನಂಬಿಕೆ ಮತ್ತು ಭಕ್ತಿಯಿಂದ ದೇವರ ಪಾದಗಳಿಗೆ ತಮ್ಮ ಕೈಲಾದಷ್ಟು ದೇಣಿಗೆ ನೀಡಿದ್ದಾರೆ. ಆ ದೇಣಿಗೆಗಳನ್ನು ದುರುಪಯೋಗಪಡಿಸಿಕೊಳ್ಳುವುದು ಅನ್ಯಾಯ. ಪಾಪ ಮತ್ತು ಅವರ ನಂಬಿಕೆಗೆ ಮಾಡಿದ ಅವಮಾನ" ಎಂದು ಹೇಳಿದ್ದಾರೆ.
ಇದೇ ವಿಚಾರವಾಗಿ ಭಾನುವಾರ ಗಂಭೀರ ಆರೋಪ ಮಾಡಿದ್ದ ಕಾಂಗ್ರೆಸ್, "ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ರಾಮ ಮಂದಿರ ಆವರಣದಲ್ಲಿರುವ ಒಂದು ತುಂಡು ಭೂಮಿಯನ್ನು ದುಬಾರಿ ಬೆಲೆಗೆ ಖರೀದಿಸಿದ್ದಾರೆ. ಶ್ರೀರಾಮನ ಹೆಸರಲ್ಲಿ ದೇಣಿಗೆ ಸಂಗ್ರಹಿಸುತ್ತಾ, ಈ ರೀತಿ ಹಗರಣ ನಡೆಸುತ್ತಿದ್ದಾರೆ' ಎಂದು ತಿಳಿಸಿತ್ತು.